ತುಮಕೂರು: ತುಮಕೂರಿನಲ್ಲಿ ಪಂಚರಥಯಾತ್ರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಗರ ಕ್ಷೇತ್ರದಲ್ಲಿ ಟಿಕೆಟ್ ಗೊಂದಲ ವಿಚಾರವಾಗಿ ಮಾತನಾಡಿದ ಅವರು, 2 ಬಾರಿ ಕಡಿಮೆ ಅಂತರದಲ್ಲಿ ಗೋವಿಂದರಾಜು ಸೋತಿದ್ದರೂ ಅವರು ಒಳ್ಳೆಯ ಕೆಲಸ ಮಾಡಿಕೊಂಡು ಬಂದಿದ್ದಾರೆ. ಗೋವಿಂದರಾಜುಗೆ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದರು.

ತಿಪಟೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿ ಇಲ್ಲದ ವಿಚಾರವಾಗಿ ಮಾತನಾಡಿ, ಅಲ್ಲಿಗೆ ಸೂಕ್ತ ಅಭ್ಯರ್ಥಿಯನ್ನು ಹಾಕಲಾಗುವುದು. ಈ ಬಾರಿ ಶಿರಾದಲ್ಲಿಯೂ ಕೂಡಾ ಜೆಡಿಎಸ್ ಗೆಲ್ಲುತ್ತದೆ. ತುಮಕೂರು ಜಿಲ್ಲೆಯ 11 ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಲಿದೆ. ಈ ಬಾರಿ ಅತಂತ್ರ ಫಲಿತಾಂಶ ಬರುವ ಪ್ರಶ್ನೆಯೇ ಇಲ್ಲ. 123 ಸ್ಥಾನ ಗಳಿಸಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಹಂತ ಹಂತವಾಗಿ ಇಡೀ ರಾಜ್ಯ ಪಂಚರತ್ನ ಯಾತ್ರೆಗೆ ಹೋಗುತ್ತೇವೆ ಎಂದು ತಿಳಿಸಿದರು. 

ಜೆಡಿಎಸ್‌ನ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಪ್ರಕಟವಾಗಲಿದೆ. ಶುಭ ಗಳಿಗೆ, ಶುಭ ಮೂಹೂರ್ತ ನೋಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ರಾಜಕೀಯದ ಸುನಾಮಿ ಅಲೆ ಜೆಡಿಎಸ್ ಪರವಾಗಿ ಎದ್ದಿದೆ. ಎಲ್ಲಾ ರಾಜಕೀಯ ಪಕ್ಷಗಳು ಕೊಚ್ಚಿಹೋಗುತ್ತವೆ ಎಂದು ಟಾಂಗ್ ನೀಡಿದರು.

ಬಿಜೆಪಿ ಕಾರ್ಯಕ್ರಮಗಳಲ್ಲಿ ರೌಡಿಶೀಟರ್‌ಗಳು ಭಾಗಿಯಾಗಿರುವ ವಿಚಾರದ ಬಗ್ಗೆ ಮಾತನಾಡಿ, ನಾನು ಇಂತಹ ವಿಚಾರಕ್ಕೆ ಪ್ರಾಮುಖ್ಯತೆ ಕೊಡುವುದಿಲ್ಲ. ನನ್ನ ಗುರಿ ಇರುವುದು ಪಂಚರತ್ನ ಯಾತ್ರೆ ಮೂಲಕ ನಾಡಿನ ಜನರ ಸಮಸ್ಯೆಗಳಿಗೆ ಪರಿಹಾರ ಕೊಡುವುದು. ಯಾರ ಪಕ್ಷದಲ್ಲಿ ಯಾರನ್ನು ಸೇರಿಸಿಕೊಳ್ಳುತ್ತಾರೆ, ಯಾರನ್ನು ಕಳುಹಿಸುತ್ತಾರೆ ಎಂಬ ವಿಚಾರ ನನಗೆ ಬೇಡವಾದುದು ಎಂದರು